Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ನಾನೆಂಬ ನಿನಾದ…
Share:
Poems January 15, 2026 ಕೆ.ಆರ್ ಮಂಗಳಾ

ನಾನೆಂಬ ನಿನಾದ…

ನಾ ಹುಟ್ಟುವ ಮುನ್ನ
ಹೇಗಿದ್ದೆ ನೆನಪಿಲ್ಲಾ
ಹುಟ್ಟಿನೊಡನೆ
ಬಂದ ಬಳುವಳಿಯೇ
ನಾನೆಂಬ ಎಳೆ
ಈ ಅಹಮಿಕೆಗೆ
ಪ್ರಾಣ ಒತ್ತೆಯಿಟ್ಟು
ಎಷ್ಟು ಯುಗಗಳಾದವು?

ಒಂದೆಳೆ ಇದ್ದುದು
ಒತ್ತೊತ್ತಾಗಿ ಸೇರುತ್ತಾ
ಬುಟ್ಟಿಯಾಗಿ, ಬಟ್ಟೆಯಾಗಿ
ಬಲೆಯಾಗಿ ನನ್ನ
ತನ್ನೊಳು ಬಂಧಿಸಿದ್ದ
ತಿಳಿಸಲು ನೀನೇ
ಬರಬೇಕಾಯಿತು ಗುರುವೇ.

ತಾ ಬೀಗಲು
ಒಂದೊಂದ ಹೆಸರಿಟ್ಟು
ರೂಪ ಕೊಟ್ಟು,
ಬಣ್ಣ ತುಂಬಿ
ನಂಟನಂತೆ, ನಲ್ಲನಂತೆ
ಚಂದದ ಮಾತುಗಳಲ್ಲಿ
ನಿಜವ ಮರೆಸುತ್ತಾ
ಕಾವಲುಗಾರನಂತೆ
ತನ್ನ ಹಿತವನೇ ಕಾವುದು

ತನ್ನಿರುವಿನ
ಸುಳುಹು ಸಿಗದಂತೆ
ನಾಜೂಕಾಗಿ
ಕಾರ್ಯಸಾಧಿಸುವ
ಅದರ ಪಟ್ಟುಗಳನರಿತು
ಕೋಡ ಹಿಡಿದು
ನೆಲಕ್ಕೆ ಚಚ್ಚಿ
ಕಂಡಲ್ಲಿ ಗುಂಡು ಸಿಡಿಸಿ
ಕೊಂದೇ ಬಿಟ್ಟೆನೆಂದು
ಅಂದುಕೊಳ್ಳುವಾಗಲೇ
ಇನ್ನೆಲ್ಲೋ ಚಿಗಿತು
ಮತ್ತೆಲ್ಲೋ
ಹೂ-ಕಾಯಿ ಬಿಟ್ಟು
ಕನ್ನಡಿಯ ಬಿಂಬದಂತೆ
ಅಣಕಿಸುತ್ತದೆ…
ಮುಪ್ಪಿಲ್ಲದುದಕೆ
ಸಾವುಂಟೆ?
ನನಗೂ- ನಿನಗೂ
ನಡುವೆ ನಿಂತಿದೆ
ಉಸಿರುಗಟ್ಟಿಸುವ
ಗಟ್ಟಿಗಾಜಿನ ಪರದೆ.

ಸಿಟ್ಟು- ಸೆಡವುಗಳ
ನೋವು ಕ್ಲೇಷಗಳ
ಭವದ ಬೇರು
ಎಲ್ಲಿದೆ ಎನುವುದ
ನಾನೀಗ ಬಲ್ಲೆ
ಒಳಗೂ-ಹೊರಗೂ
ತನಗಾಗಿಯೇ
ತಡಬಡಿಸುತ್ತದೆ
ಚೂರು ಧಕ್ಕೆಯಾದರೂ
ಸಿಡಿಲು ಬಡಿದಂತೆ
ಚಡಪಡಿಸುತ್ತದೆ
ಒತ್ತುತ್ತದೆ
ಎದೆ ಮೇಲೆ ಕುಳಿತು
ಮಣಭಾರದಂತೆ
ತೊಲಗಿಸು ತಂದೆ
ನಾನೆಂಬ ಹೊರೆಯ.

ಅರಿವಿನ ರೆಪ್ಪೆ
ತೆರೆಯದ ಕೂಸಿಗೆ
ಬಯಲ ಅನಾವರಣ!
ಮಾಗಿ ಕಾಲದಲಿ
ವಸಂತದ ವರ್ಣನೆಯೇ?
ನಮ್ಮಿಬ್ಬರ ನಡುವೆ
ನೆಲ-ಮುಗಿಲಿನಂತರ
ಕರುಣೆ ಇರಲಿ ಗುರುವೆ.

ಗುರು:
ನೆರಳಲಿ ನಿಂತು
ಕತ್ತಲು ಎನುವರೆ?
ಉಸಿರೇ ಇಲ್ಲದ
ನೆಲೆಯೇ ಕಾಣದ
ತೃಣಕಣ ಹಮ್ಮಿಗೆ
ಹೆದರುವುದೇ?

ಕೂಗಿ ಕರೆದರೂ
ಕಿವಿಗೊಡದಿರು
ಹತ್ತಿರ ಬಂದರೂ
ಗಮನಿಸದಿರು
ಎದುರೇ ನಿಂತರೂ
ಉತ್ತರಿಸದಿರು
ಮಾತಿನ ಕೂಟಕೆ
ಮರುಳಾಗದಿರು
ಮೌನದೊಳಗೂ
ಪಿಸುನುಡಿಯದಿದ್ದೊಡೆ
ಕೇಳದು ಎಂದಿಗೂ
ನಾನೆಂಬ ನಿನಾದ.

ಅರಿವಿಗೂ- ನಿನಗೂ
ಕೂದಲೆಳೆಯಂತರ
ಕೊರಗುವುದೇಕೆ ಕಂದಾ?
ಬೀಗುವ ಹಮ್ಮೇ
ಆಗುವ ಹಂಬಲ
ಎರಡೂ ಬೇಡ ಕೂಸೇ
ನೀ ನೀನಾಗಿದ್ದರೆ
ಅದುವೆ ಚೆನ್ನ
ಈ ಮರ್ಮವ ನೀನರಿಯೇ

ನಿನ್ನೆ-ನಾಳೆಗಳ
ನಂಟನು ಬಿಟ್ಟರೆ
ನಾನೆಂಬುದರ
ಸೊಂಟವೇ ಮುರಿವುದು
ನಿನ್ನ ಕಣ್ಣಲೇ
ನಿನ್ನನು ಕಂಡರೆ
ಹಮ್ಮಿನ ಭಾವವೇ
ಕರಗುವುದು.

ಈ ಕ್ಷಣದಲಿ
‘ಆ ಇಗೋ’ ಎಲ್ಲಿದೆ?
ಅದು ಕಾಲದ ಬಾಗಿಲ
ಕಾಯುವ ಕಾವಲು.
ಬಯಲ ಪ್ರೀತಿಯ
ಅನಂತದ ಶಿಶುವಿಗೆ
ಕಾಲದ ಸೂತಕ
ಕಾಡುವುದೇ?

Previous post ಬಯಲಾದ ದೇವರು
ಬಯಲಾದ ದೇವರು
Next post ಸರ್ವ ಧರ್ಮ ಸಮನ್ವಯ
ಸರ್ವ ಧರ್ಮ ಸಮನ್ವಯ

Related Posts

ಮರೆತೆ…
Share:
Poems

ಮರೆತೆ…

July 4, 2022 ಜ್ಯೋತಿಲಿಂಗಪ್ಪ
ಮಗುವಾಗಬೇಕು ನಿಜ ಮರಳದು ಚೈತನ್ಯ ಮರೆತೆ ಹೂಳಲಾಗದು ನೆಳಲು ನಿಜ ನೆಳಲು ಹಿಂಬಾಲಿಸುವುದು ಮರೆತೆ ನೆರಳು ಯಾವಾಗಲೂ ಇರದು ನಿಜ ನೆರಳು ಇರುವಾಗ ಬಿಸಿಲೂ ಇರುವುದು ಮರೆತೆ ಸಮಯ...
…ಬಯಲನೆ ಬಿತ್ತಿ
Share:
Poems

…ಬಯಲನೆ ಬಿತ್ತಿ

August 11, 2025 ಜ್ಯೋತಿಲಿಂಗಪ್ಪ
ಅಲ್ಲಿ ನೇತಾಡುವ ಪಟಗಳೆಲ್ಲಾ ನಿನ್ನೆಯವು ಯಾರಿದ್ದಾರೆ…ಯಾರಿಲ್ಲ…ಯಾರೆಲ್ಲ ಕಣ್ಣೊಳಗಣ ರೂಹು ಕಣ್ಣ ಕೊಲ್ಲದು ಕಂಗಳ ಮರೆಯ ಕತ್ತಲಿಗೆ ಕಂಗಳೇ ಪ್ರಮಾಣ ಪದದ ಅರ್ಥ...

Comments 2

  1. Dr.Basavaraj Sabarad
    Jan 17, 2026 Reply

    ಮಂಗಳಾ ಅವರ ಕವಿತೆಗಳು ತುಂಬಾ ಅರ್ಥಪೂರ್ಣವಾಗಿವೆ.ಅಭಿನಂದನೆಗಳು.

  2. Dr. Shraddhananda swamiji, Vijayapura
    Feb 5, 2026 Reply

    The poem is really good.

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಗುರು-ಶಿಷ್ಯ ಸಂಬಂಧ
ಗುರು-ಶಿಷ್ಯ ಸಂಬಂಧ
August 8, 2021
ಪ್ರಭುವಿನ ಗುರು ಅನಿಮಿಷ -3
ಪ್ರಭುವಿನ ಗುರು ಅನಿಮಿಷ -3
October 21, 2024
ನನ್ನೊಳಗಿನ ನೀನು
ನನ್ನೊಳಗಿನ ನೀನು
April 29, 2018
ಕಂಡದ್ದು- ಕಾಣದ್ದು
ಕಂಡದ್ದು- ಕಾಣದ್ದು
July 10, 2025
ಕನ್ನಗತ್ತಿಯ ಮಾರಯ್ಯ
ಕನ್ನಗತ್ತಿಯ ಮಾರಯ್ಯ
April 3, 2019
ಬಯಲಾಟ
ಬಯಲಾಟ
March 17, 2021
ಶಿವಮಯ-ಶಿವೇತರ ಗುಣಗಳು
ಶಿವಮಯ-ಶಿವೇತರ ಗುಣಗಳು
January 4, 2020
ಗುಟುಕು ಆಸೆ…
ಗುಟುಕು ಆಸೆ…
May 8, 2024
ಲೋಕವೆಲ್ಲ ಕಾಯಕದೊಳಗು…
ಲೋಕವೆಲ್ಲ ಕಾಯಕದೊಳಗು…
May 1, 2018
ಮನಸ್ಸು
ಮನಸ್ಸು
September 7, 2020
Copyright © 2026 Bayalu