Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ನಾನೆಂಬ ನಿನಾದ…
Share:
Poems January 15, 2026 ಕೆ.ಆರ್ ಮಂಗಳಾ

ನಾನೆಂಬ ನಿನಾದ…

ನಾ ಹುಟ್ಟುವ ಮುನ್ನ
ಹೇಗಿದ್ದೆ ನೆನಪಿಲ್ಲಾ
ಹುಟ್ಟಿನೊಡನೆ
ಬಂದ ಬಳುವಳಿಯೇ
ನಾನೆಂಬ ಎಳೆ
ಈ ಅಹಮಿಕೆಗೆ
ಪ್ರಾಣ ಒತ್ತೆಯಿಟ್ಟು
ಎಷ್ಟು ಯುಗಗಳಾದವು?

ಒಂದೆಳೆ ಇದ್ದುದು
ಒತ್ತೊತ್ತಾಗಿ ಸೇರುತ್ತಾ
ಬುಟ್ಟಿಯಾಗಿ, ಬಟ್ಟೆಯಾಗಿ
ಬಲೆಯಾಗಿ ನನ್ನ
ತನ್ನೊಳು ಬಂಧಿಸಿದ್ದ
ತಿಳಿಸಲು ನೀನೇ
ಬರಬೇಕಾಯಿತು ಗುರುವೇ.

ತಾ ಬೀಗಲು
ಒಂದೊಂದ ಹೆಸರಿಟ್ಟು
ರೂಪ ಕೊಟ್ಟು,
ಬಣ್ಣ ತುಂಬಿ
ನಂಟನಂತೆ, ನಲ್ಲನಂತೆ
ಚಂದದ ಮಾತುಗಳಲ್ಲಿ
ನಿಜವ ಮರೆಸುತ್ತಾ
ಕಾವಲುಗಾರನಂತೆ
ತನ್ನ ಹಿತವನೇ ಕಾವುದು

ತನ್ನಿರುವಿನ
ಸುಳುಹು ಸಿಗದಂತೆ
ನಾಜೂಕಾಗಿ
ಕಾರ್ಯಸಾಧಿಸುವ
ಅದರ ಪಟ್ಟುಗಳನರಿತು
ಕೋಡ ಹಿಡಿದು
ನೆಲಕ್ಕೆ ಚಚ್ಚಿ
ಕಂಡಲ್ಲಿ ಗುಂಡು ಸಿಡಿಸಿ
ಕೊಂದೇ ಬಿಟ್ಟೆನೆಂದು
ಅಂದುಕೊಳ್ಳುವಾಗಲೇ
ಇನ್ನೆಲ್ಲೋ ಚಿಗಿತು
ಮತ್ತೆಲ್ಲೋ
ಹೂ-ಕಾಯಿ ಬಿಟ್ಟು
ಕನ್ನಡಿಯ ಬಿಂಬದಂತೆ
ಅಣಕಿಸುತ್ತದೆ…
ಮುಪ್ಪಿಲ್ಲದುದಕೆ
ಸಾವುಂಟೆ?
ನನಗೂ- ನಿನಗೂ
ನಡುವೆ ನಿಂತಿದೆ
ಉಸಿರುಗಟ್ಟಿಸುವ
ಗಟ್ಟಿಗಾಜಿನ ಪರದೆ.

ಸಿಟ್ಟು- ಸೆಡವುಗಳ
ನೋವು ಕ್ಲೇಷಗಳ
ಭವದ ಬೇರು
ಎಲ್ಲಿದೆ ಎನುವುದ
ನಾನೀಗ ಬಲ್ಲೆ
ಒಳಗೂ-ಹೊರಗೂ
ತನಗಾಗಿಯೇ
ತಡಬಡಿಸುತ್ತದೆ
ಚೂರು ಧಕ್ಕೆಯಾದರೂ
ಸಿಡಿಲು ಬಡಿದಂತೆ
ಚಡಪಡಿಸುತ್ತದೆ
ಒತ್ತುತ್ತದೆ
ಎದೆ ಮೇಲೆ ಕುಳಿತು
ಮಣಭಾರದಂತೆ
ತೊಲಗಿಸು ತಂದೆ
ನಾನೆಂಬ ಹೊರೆಯ.

ಅರಿವಿನ ರೆಪ್ಪೆ
ತೆರೆಯದ ಕೂಸಿಗೆ
ಬಯಲ ಅನಾವರಣ!
ಮಾಗಿ ಕಾಲದಲಿ
ವಸಂತದ ವರ್ಣನೆಯೇ?
ನಮ್ಮಿಬ್ಬರ ನಡುವೆ
ನೆಲ-ಮುಗಿಲಿನಂತರ
ಕರುಣೆ ಇರಲಿ ಗುರುವೆ.

ಗುರು:
ನೆರಳಲಿ ನಿಂತು
ಕತ್ತಲು ಎನುವರೆ?
ಉಸಿರೇ ಇಲ್ಲದ
ನೆಲೆಯೇ ಕಾಣದ
ತೃಣಕಣ ಹಮ್ಮಿಗೆ
ಹೆದರುವುದೇ?

ಕೂಗಿ ಕರೆದರೂ
ಕಿವಿಗೊಡದಿರು
ಹತ್ತಿರ ಬಂದರೂ
ಗಮನಿಸದಿರು
ಎದುರೇ ನಿಂತರೂ
ಉತ್ತರಿಸದಿರು
ಮಾತಿನ ಕೂಟಕೆ
ಮರುಳಾಗದಿರು
ಮೌನದೊಳಗೂ
ಪಿಸುನುಡಿಯದಿದ್ದೊಡೆ
ಕೇಳದು ಎಂದಿಗೂ
ನಾನೆಂಬ ನಿನಾದ.

ಅರಿವಿಗೂ- ನಿನಗೂ
ಕೂದಲೆಳೆಯಂತರ
ಕೊರಗುವುದೇಕೆ ಕಂದಾ?
ಬೀಗುವ ಹಮ್ಮೇ
ಆಗುವ ಹಂಬಲ
ಎರಡೂ ಬೇಡ ಕೂಸೇ
ನೀ ನೀನಾಗಿದ್ದರೆ
ಅದುವೆ ಚೆನ್ನ
ಈ ಮರ್ಮವ ನೀನರಿಯೇ

ನಿನ್ನೆ-ನಾಳೆಗಳ
ನಂಟನು ಬಿಟ್ಟರೆ
ನಾನೆಂಬುದರ
ಸೊಂಟವೇ ಮುರಿವುದು
ನಿನ್ನ ಕಣ್ಣಲೇ
ನಿನ್ನನು ಕಂಡರೆ
ಹಮ್ಮಿನ ಭಾವವೇ
ಕರಗುವುದು.

ಈ ಕ್ಷಣದಲಿ
‘ಆ ಇಗೋ’ ಎಲ್ಲಿದೆ?
ಅದು ಕಾಲದ ಬಾಗಿಲ
ಕಾಯುವ ಕಾವಲು.
ಬಯಲ ಪ್ರೀತಿಯ
ಅನಂತದ ಶಿಶುವಿಗೆ
ಕಾಲದ ಸೂತಕ
ಕಾಡುವುದೇ?

Previous post ಬಯಲಾದ ದೇವರು
ಬಯಲಾದ ದೇವರು
Next post ಸರ್ವ ಧರ್ಮ ಸಮನ್ವಯ
ಸರ್ವ ಧರ್ಮ ಸಮನ್ವಯ

Related Posts

ಬಿಟ್ಟು ಹೋದ ಬಸವಣ್ಣ
Share:
Poems

ಬಿಟ್ಟು ಹೋದ ಬಸವಣ್ಣ

April 29, 2018 ಡಾ. ಶಶಿಕಾಂತ ಪಟ್ಟಣ
ಬಿಟ್ಟು ಹೋದ ಬಸವಣ್ಣ ನೆತ್ತಿ ಸುಡುವ ಬಿಸಿಲಿನಲ್ಲಿ ತನ್ನ ನೆರಳ ತಾ ತುಳಿದುಕೊಂಡು. ಮನೆಗೆ ಹೋಗದೆ, ಮಡದಿ ಮಕ್ಕಳಿಗೆ ತಿಳಿಸದೆ, ಮತ್ತೆ ಮರಳಿ ಬಾರದ, ಹೊರಳಿ ತಿರುಗಿ ನೋಡದ, ಭಾರ...
ಇದ್ದಷ್ಟೇ…
Share:
Poems

ಇದ್ದಷ್ಟೇ…

January 10, 2021 ಜ್ಯೋತಿಲಿಂಗಪ್ಪ
ಇದ್ದಷ್ಟೇ ಇದರಾಚೆ ಕನಸೂ ಇಲ್ಲ ನಿದ್ದೆಯೂ ಇಲ್ಲ ಇರುವಷ್ಟು ಇರುವುದು ಇದ್ದ ಹಾಗೆ ಇರು ಕನಸು ಇದ್ದಾಗಷ್ಟೇ ಕನಸು ಇರುವುದು ಎಚ್ಚರಾದರೆ ಕನಸು ಕನವರಿಸುವುದು ಎಚ್ಚರಾಗು ಉದಯದ ಮೊದಲ...

Comments 2

  1. Dr.Basavaraj Sabarad
    Jan 17, 2026 Reply

    ಮಂಗಳಾ ಅವರ ಕವಿತೆಗಳು ತುಂಬಾ ಅರ್ಥಪೂರ್ಣವಾಗಿವೆ.ಅಭಿನಂದನೆಗಳು.

  2. Dr. Shraddhananda swamiji, Vijayapura
    Feb 5, 2026 Reply

    The poem is really good.

Leave a Reply to Dr. Shraddhananda swamiji, Vijayapura Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಅವಿರಳ ಅನುಭಾವಿ: ಚನ್ನಬಸವಣ್ಣ
ಅವಿರಳ ಅನುಭಾವಿ: ಚನ್ನಬಸವಣ್ಣ
March 6, 2020
ಆಗು ಕನ್ನಡಿಯಂತೆ…
ಆಗು ಕನ್ನಡಿಯಂತೆ…
September 13, 2025
ಮಹದೇವ ಭೂಪಾಲ ಮಾರಯ್ಯನಾದದ್ದು…
ಮಹದೇವ ಭೂಪಾಲ ಮಾರಯ್ಯನಾದದ್ದು…
March 5, 2019
ಗುಟುಕು ಆಸೆ…
ಗುಟುಕು ಆಸೆ…
May 8, 2024
ವೈಚಾರಿಕ ಚಳುವಳಿಯ ಮರುಸ್ಥಾಪನೆ
ವೈಚಾರಿಕ ಚಳುವಳಿಯ ಮರುಸ್ಥಾಪನೆ
April 29, 2018
ಬೆಳಕಿನ ಹುಳು
ಬೆಳಕಿನ ಹುಳು
December 9, 2025
ಕರ್ತಾರನ ಕಮ್ಮಟ
ಕರ್ತಾರನ ಕಮ್ಮಟ
January 4, 2020
ಬಸವಣ್ಣನವರ ಒಂದು ವಚನ
ಬಸವಣ್ಣನವರ ಒಂದು ವಚನ
April 9, 2021
ಮಿಲಿಂದ ಪ್ರಶ್ನೆ – ಮೂರು ಪ್ರಶ್ನೋತ್ತರಗಳು
ಮಿಲಿಂದ ಪ್ರಶ್ನೆ – ಮೂರು ಪ್ರಶ್ನೋತ್ತರಗಳು
July 10, 2023
ಶರಣರು ಕಂಡ ಸಮಸಮಾಜ
ಶರಣರು ಕಂಡ ಸಮಸಮಾಜ
July 4, 2022
Copyright © 2026 Bayalu