Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ರೆಕ್ಕೆ ಬಿಚ್ಚಿ…
Share:
Poems May 8, 2024 ಕೆ.ಆರ್ ಮಂಗಳಾ

ರೆಕ್ಕೆ ಬಿಚ್ಚಿ…

‘ವರ್ಚ್ಯುವಲ್ ವರ್ಲ್ಡ್’ ಎನುವುದು
ಕಂಪ್ಯೂಟರ್ ಯುಗದ ಕೂಸಲ್ಲ ಸ್ವಾಮಿ…
ಅದರದು ಅನಾದಿ ಇತಿಹಾಸ
ಸರ್ವವ್ಯಾಪಿ, ಸರ್ವಶಕ್ತ ಸ್ವರೂಪಿ
ಸೂರ್ಯನ ಸುತ್ತ ಭೂಮಿ ಸುತ್ತಿದರೆ
ಇದರ ಕಿರುಬೆರಳಲ್ಲೇ
ಜಗ ಗಿರಕಿ ಹೊಡೆಯುತಿದೆ

ಹೇಗೆನ್ನುವಿರಾ?
ಗಮನವಿಟ್ಟು ಆಲಿಸಿ-

ಹುಟ್ಟಿ ಕಣ್ಣುಬಿಡುವ ಜೀವಕೆ
ನೆಲದ ನಂಟೇ ಸಿಗದಂತೆ
ಸುತ್ತುವವು ಜೋಡಿ ಸರಗಂಟು
ಹೆಸರು- ಮನೆತನ, ಗಂಡು- ಹೆಣ್ಣು,
ಗಳಿಗೆ- ನಕ್ಷತ್ರ, ಜಾತಿ- ವಿಜಾತಿ,
ನಮ್ಮವರು- ತಮ್ಮವರು, ಸರಿ- ತಪ್ಪು,
ಗೌರವ- ಅಭಿಮಾನಗಳ ಸ್ಥಾನಮಾನ
ಗೆಲುವು- ಸೋಲುಗಳ ಜಿದ್ದಾಜಿದ್ದಿ…

ಬೆಳೆಯುತ್ತಾ ಹೋದಂತೆ ಕಾಲಿಗೂ,ಕೈಗೂ,
ಇನ್ನಷ್ಟು ಸರಪಳಿಗಳ ಸರಮಾಲೆ
ಸುಖ-ಸವಲತ್ತುಗಳ ಹಂಬಲ,
ಕೂಡಿಗುಡ್ಡೆ ಹಾಕುವ ತೆವಲು
ಹಂಚಿಕೊಳ್ಳಲೊಪ್ಪದ ಜಿಗುಟು
ಜ್ಞಾನಿ ಎನಿಸಿಕೊಳುವ ಬಯಕೆ
ನಾಮುಂದು ತಾಮುಂದು ಎನುವ
ಮದ-ಮತ್ಸರಗಳ ಬಡಿವಾರ…

ಈ ನಡುವೆ ದೈವ ಭಕ್ತಿಯ ಸೋಗು
ಅರ್ಚನೆ- ಪೂಜೆ- ಆರಾಧನೆಗಳು
ವ್ರತ- ನೇಮ- ಉಪವಾಸಗಳು
ತೀರ್ಥಕ್ಷೇತ್ರ ಪುಣ್ಯಸ್ನಾನಗಳು
ಜಪ- ತಪ, ಯೋಗ- ಧ್ಯಾನಗಳು
ಕುಂಡಲಿನಿ ಜಾಗೃತಿಯ ಸರ್ಕಸ್ಸುಗಳು
ಚಕ್ರಗಳು, ಮಂಡಲಗಳು
ಶಾಸ್ತ್ರ ಪುರಾಣಗಳ ತಾಕೀತುಗಳು
ಧರ್ಮ– ಸಂಸ್ಕೃತಿಯ ಹೇರಿಕೆಗಳು
ಸಂಪ್ರದಾಯದ ಕಟ್ಟುಪಾಡುಗಳು…

ಸತ್ತವರಿಂದ, ಹೆತ್ತವರಿಂದ,
ನೆಂಟರಿಂದ, ನೆರೆಯವರಿಂದ,
ಶಾಲೆಯಿಂದ, ಓಣಿಗಳಿಂದ,
ಊರವರಿಂದ, ನಾಡವರಿಂದ,
ನೆನಪುಗಳಿಂದ, ನಂಬಿಕೆಗಳಿಂದ,
ತಲೆ ತಲೆಗೂ ಸಾಗಿಬಂದ
ಪಿತ್ರಾರ್ಜಿತ ಬಳುವಳಿಗಳಿವು…

ಈ ಅನಂತ ಆವರಣಗಳ
ಬಂಧವೇ ‘ವರ್ಚ್ಯುವಲ್ ರಿಯಾಲಿಟಿ’
ಇರುವಂತೇ ತೋರುತಿರುವ
ನಿಜವೆಂದೇ ನಂಬಿಸಿರುವ
ನಾವಪ್ಪಿ ಜೀವಿಸುವ ಮನೋಲೋಕ,
ಕಣ್ಣಿಗೆ ಕಾಣದ, ಮುಟ್ಟಲು ಸಿಗದ
‘ವರ್ಚ್ಯುವಲ್ ರಿಯಾಲಿಟಿ’
ವಸ್ತುಜಗತ್ತಿನ ನೆಲೆಯರಿಯದ
ಈ ಭ್ರಮೆಗಳಿಗೆಲ್ಲ ಜೀತಕಿದ್ದು
ದಿನರಾತ್ರಿ ಸೆಣಸಾಡಿ, ತೆವಳಿದ್ದೇ ಬಂತು
ರೆಕ್ಕೆಗಳು ಇರುವುದೇ ಮರೆತು ಹೋಗಿತ್ತು
ಜೊತೆಯಲೇ ಪ್ರಾಣಾಧಾರವಾಗಿದ್ದ
‘ರಿಯಲ್ ವರ್ಲ್ಡ್’ ಕಾಣದಾಗಿತ್ತು…

ಸಂತರು ತೋರಿದ, ಶರಣರು ಬದುಕಿದ
ಮಹಂತರು ಕಂಡ ನಿಜದ ನೆಲೆಯಲ್ಲಿ
ನಿರೀಕ್ಷೆಗಳಿಲ್ಲ, ನೋವುಗಳಿಲ್ಲ
ಬೇಕು-ಬೇಡಗಳ ಸುಳಿಗಳಿಲ್ಲ
ಸಂದೇಹಗಳಿಲ್ಲ, ಸಂಕುಚಿತತೆಯಿಲ್ಲ
ಪೂರ್ವಾಗ್ರಹಗಳಿಲ್ಲ, ಪರನಿಂದೆಗಳಿಲ್ಲ
ನಾನೀನೆಂಬ ಬೇಧಗಳಿಲ್ಲ
ನಿನ್ನೆಯ ಹಳಹಳಿಕೆಗಳಿಲ್ಲ
ನಾಳೆಯ ಹಳವಂಡಗಳಿಲ್ಲ
ಅದು ನಿರಾಳದಾಗಸದ ಪ್ರಶಾಂತತಾಣ

ಹಾರಲರಿಯದ ನಮ್ಮ ರೆಕ್ಕೆಗಳಿಗೆ
ಬಲವೂ ಬೇಕು, ಛಲವೂ ಬೇಕು
ಸುಳ್ಳಿನಾವರಣಗಳಿಂದ
ಬಿಡಿಸಿಕೊಳುವ ಶ್ರದ್ಧೆ ಬೇಕು
‘ನಿನ್ನ ಸ್ವಾತಂತ್ರ್ಯದಿ ನೀನಿರು ಮಗು’
ಎನುವ ಗುರು ವಾಕ್ಯದ ಸೂಚನೆಯಲಿ
ಬಿಡುಗಡೆಯ ದಾರಿ ಕಾಣಬೇಕು
ರೆಕ್ಕೆಗಳ ಬಿಚ್ಚಿ ಚಿಮ್ಮಬೇಕು.

Previous post ಗುಟುಕು ಆಸೆ…
ಗುಟುಕು ಆಸೆ…
Next post ಪ್ರಕೃತಿಯೊಂದಿಗೆ ಬಾಳಿದವರು…
ಪ್ರಕೃತಿಯೊಂದಿಗೆ ಬಾಳಿದವರು…

Related Posts

ಹಾಯ್ಕು
Share:
Poems

ಹಾಯ್ಕು

September 6, 2023 ಜ್ಯೋತಿಲಿಂಗಪ್ಪ
೦೧ ದೀಪ ಹಿಡಿದು ಇರುಳು ಆ ನಕ್ಷತ್ರ ಹುಡುಕಲುಂಟೇ… ೦೨ ಮದವೇ ಮದ್ಯ ಮದ ಏರಿದ ಅಷ್ಟೂ ಮತ್ತು ಏರಿತು. ೦೩ ಸಾವು ಎಂಬುದು ಕೊಬ್ಬಿನ ಮಾತು ಅಲ್ಲಾ ಮೆಲ್ಲ ಮಾತಾಡು. ೦೪...
ಯಾಕೀ ಗೊಡವೆ?
Share:
Poems

ಯಾಕೀ ಗೊಡವೆ?

August 10, 2023 ಜ್ಯೋತಿಲಿಂಗಪ್ಪ
ಸಾಯುವುದು ಒಂದು ದಿನ ಇದ್ದೇ ಇದೆ ಬಿಡು ದಿನಾ ಏಕೆ ಸಾಯುವುದು ದಿನಕೆ ಸಾವಿಲ್ಲವೇ ಹುಟ್ಟುವ ಭರವಸೆ ಖಂಡಿತಾ ಹುಟ್ಟೇ ಒಂದು ಮದ ಸಾವರಿತರೆ ಮದ ಸಾವುದು ನಿತ್ಯ ಸತ್ಯದ ಗೊಡವೆ ಬೇಕೇ...

Comments 2

  1. ಶ್ರದ್ಧಾನಂದ ಸ್ವಾಮೀಜಿ, ವಿಜಯಪುರ
    May 9, 2024 Reply

    ರೆಕ್ಕೆ ಬಿಚ್ಚಿ ಕವನ ಓದುವುದರಲ್ಲಿ ಅನಂತ ಆಗಸದಿ ಹೊಸ ಬೆಳಕಿನ ಅರಿವಿನ ರವಿಯ ಕಂಡಂತೆ ಆಯಿತು.

  2. Padmalaya
    May 16, 2024 Reply

    ಭಾಷೆ ಇನ್ನೂ ಸ್ವಲ್ಪ ಬದಲಾದರೆ ಚೆಂದ.ನಿರೂಪಣೆ ಮಾಡುವಾಗ ಎಚ್ಚರವಾಗಿರಬೇಕಕಮ್ಮ

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಪೊರೆವ ದನಿ…
ಪೊರೆವ ದನಿ…
August 11, 2025
ಧರ್ಮದ ನೆಲೆಯಲ್ಲಿ ಬದುಕು
ಧರ್ಮದ ನೆಲೆಯಲ್ಲಿ ಬದುಕು
September 5, 2019
ಗಾಳಿ ಬುರುಡೆ
ಗಾಳಿ ಬುರುಡೆ
June 17, 2020
ಶರಣರು ಕಂಡ ಸಹಜಧರ್ಮ
ಶರಣರು ಕಂಡ ಸಹಜಧರ್ಮ
April 29, 2018
ಖಾಲಿ ಕೊಡ ತುಳುಕಿದಾಗ…
ಖಾಲಿ ಕೊಡ ತುಳುಕಿದಾಗ…
October 5, 2021
ಬೆಳಗಾವಿ ಅಧೀವೇಶನ: 1924
ಬೆಳಗಾವಿ ಅಧೀವೇಶನ: 1924
December 13, 2024
ಹಳದಿ ಹೂವಿನ ಸುತ್ತಾ…
ಹಳದಿ ಹೂವಿನ ಸುತ್ತಾ…
November 9, 2021
ಘನಲಿಂಗಿ ದೇವರು ಮತ್ತು ವಚನ ಇತಿಹಾಸ
ಘನಲಿಂಗಿ ದೇವರು ಮತ್ತು ವಚನ ಇತಿಹಾಸ
January 7, 2022
ಶರಣರ, ತತ್ವಪದಕಾರರ ಹಾಗೂ ಸೂಫಿ ಪರಂಪರೆಗಳ ತಾತ್ವಿಕ ನೆಲೆಗಳು
ಶರಣರ, ತತ್ವಪದಕಾರರ ಹಾಗೂ ಸೂಫಿ ಪರಂಪರೆಗಳ ತಾತ್ವಿಕ ನೆಲೆಗಳು
January 4, 2020
ವಿದ್ವಾಂಸರ ದೃಷ್ಟಿಯಲ್ಲಿ ಬಸವಣ್ಣ-3
ವಿದ್ವಾಂಸರ ದೃಷ್ಟಿಯಲ್ಲಿ ಬಸವಣ್ಣ-3
December 6, 2020
Copyright © 2026 Bayalu